
ಮಂಗಳೂರು: ತಂಡವೊಂದು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಉಪ್ಪಳ ಹಿದಾಯತ್ ನಗರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯತ್ ಸದಸ್ಯ ಸೇರಿದಂತೆ ಆರು ಮಂದಿ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಚ್ಲಂಗೋಡಿನ ಮುಶಾಹಿದ್ ಹುಸೈನ್ ಹಲ್ಲೆಗೊಳಗಾದವರು. ಪಂಚಾಯತ್ ಸದಸ್ಯ ಮುಸ್ತಫಾ, ಸುಹೈಲ್ ಸೇರಿದಂತೆ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುಶಾಹಿದ್ ನನ್ನು ಕಾರಿನಲ್ಲಿ ಅಪಹರಿಸಿದ್ದ ತಂಡವು ಹಲ್ಲೆ ನಡೆಸಿದ್ದು, ಉಪ್ಪಳ ಹಿದಾಯತ್ ನಗರದ ಪೆಟ್ರೋಲ್ ಪಂಪ್ ಸಮೀಪ ಬಿಟ್ಟು ಪರಾರಿಯಾಗಿದ್ದರು. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಮುಶಾಹಿದ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.














