
ಕರ್ನಾಟಕದಲ್ಲಿ ಸದ್ಯ ಕೋವಿಡ್-19ಗೆ ಸಂಬಂಧಿಸಿದ ಯಾವುದೇ ನಿರ್ಬಂಧಗಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕೋವಿಡ್ ಜೆ-1 ಉಪತಳಿಯು ಗಂಭೀರ ದುಷ್ಪರಿಣಾಮಗಳನ್ನು ಉಂಟುಮಾಡಿಲ್ಲ ಎಂದು ತಿಳಿಸಿರುವ ಅವರು, ರಾಜ್ಯದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದಿದ್ದಾರೆ.
ಪ್ರತಿ ವಾರ ಕೊರೋನಾ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಶಾಲಾ-ಕಾಲೇಜುಗಳ ಆರಂಭದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಕೋವಿಡ್ ಜೆ-1 ಉಪತಳಿಯಿಂದ ಗಂಭೀರ ಪರಿಣಾಮಗಳಿಲ್ಲ ಎಂದು ದೃಢಪಡಿಸಿದ್ದಾರೆ. ‘ಅನಗತ್ಯ ಆತಂಕ ಬೇಡ. ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಸದ್ಯಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಹೊರತುಪಡಿಸಿ ಯಾವುದೇ ನಿರ್ಬಂಧಗಳ ಅಗತ್ಯವಿಲ್ಲ,’ ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಒಳಗೆ ಯಾತ್ರೆಗೆ ಯಾವುದೇ ತಡೆಯಿಲ್ಲ, ಚಟುವಟಿಕೆಗಳಿಗೂ ಯಾವುದೇ ನಿಷೇಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಪರೀಕ್ಷೆ ಆರಂಭಿಸಲು ಸೂಚನೆ ನೀಡಲಾಗಿದೆ. ಎರಡು ದಿನಗಳಲ್ಲಿ ಆರ್ಟಿ-ಪಿಸಿಆರ್ ಮತ್ತು ರ್ಯಾಪಿಡ್ ಆಯಂಟಿಜೆನ್ ಪರೀಕ್ಷೆ ಕಿಟ್ಗಳನ್ನು ವಿತರಿಸಲಾಗಿದೆ. ತೀವ್ರ ಉಸಿರಾಟ ಸೋಂಕು (ಸಾರಿ), ಶೀತಜ್ವರ ಮಾದರಿ ಅನಾರೋಗ್ಯ (ಐಎಲ್ಐ), ಉಸಿರಾಟ ಸಮಸ್ಯೆ, ಹೃದ್ರೋಗ ಇರುವ ಮಕ್ಕಳು ಮತ್ತು ವೃದ್ಧರಿಗೆ ಕಡ್ಡಾಯ ಪರೀಕ್ಷೆಗೆ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಗೂ ಈ ಸೂಚನೆಯನ್ನು ವಿಸ್ತರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಒಬ್ಬ 84 ವರ್ಷದ ವೃದ್ಧರ ಸಾವಿನ ಬಗ್ಗೆ ವರದಿಯಾಗಿದ್ದರೂ, ಅವರಿಗೆ ಬೈಪಾಸ್ ಶಸ್ತ್ರಚಿಕಿತ್ಸೆ, ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಮತ್ತು ಟಿಬಿ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳಿದ್ದವು. ‘ಕೊರೋನಾ ಪಾಸಿಟಿವ್ ಎಂದಾಕ್ಷಣ ಅದೇ ಸಾವಿನ ಕಾರಣ ಎಂದು ಹೇಳಲಾಗದು. ಡೆತ್ ಆಡಿಟ್ ವರದಿಯನ್ನು ಕೇಳಿದ್ದೇವೆ, ಅದರಿಂದ ಸ್ಪಷ್ಟತೆ ದೊರೆಯಲಿದೆ,’ ಎಂದು ಸಚಿವರು ಹೇಳಿದ್ದಾರೆ.
‘ಮುನ್ನೆಚ್ಚರಿಕೆ ಕ್ರಮಗಳಲ್ಲಿ ಯಾವುದೇ ಕೊರತೆ ಇಲ್ಲ. ಮಂಗಳೂರು, ಮಡಿಕೇರಿಯಂತಹ ಕಡೆಗಳಲ್ಲಿ ಭೀತಿಯ ವಾತಾವರಣವಿಲ್ಲ. ಆದ್ದರಿಂದ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ರಾಜ್ಯದ ಒಳಗೆ ಅಥವಾ ಹೊರಗೆ ಯಾತ್ರೆಗೆ ತಡೆಯಿಲ್ಲ,’ ಎಂದು ದಿನೇಶ್ ಗುಂಡೂರಾವ್ ಒತ್ತಿ ಹೇಳಿದ್ದಾರೆ. ಒಂದು ಪ್ರಶ್ನೆಗೆ ಉತ್ತರವಾಗಿ, ‘ಲಾಕ್ಡೌನ್ ಇಷ್ಟವಿದ್ದರೆ ಹೇಳಿ, ಘೋಷಣೆ ಮಾಡುತ್ತೇವೆ,’ ಎಂದು ಹಾಸ್ಯದಿಂದ ಹೇಳಿದರು.
ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.













