ವಿವೇಕಾನಂದ ಕಾಲೇಜಿನಲ್ಲಿ ಪೋಷಕರ ಸಭೆ ಬೌದ್ಧಿಕ ಬೆಳವಣಿಗೆ ಅಗತ್ಯ-ಡಾ.ಶ್ರೀಪತಿ ಕಲ್ಲೂರಾಯ -ಕಹಳೆ ನ್ಯೂಸ್

ಪುತ್ತೂರು: ಬದುಕಿನಲ್ಲಿ ಶಾಂತಿ ಹಾಗೂ ನೆಮ್ಮದಿಯನ್ನು ಕೊಡಬಹುದಾದ ಜೀವನ ಕ್ರಮ ನಮ್ಮ ಪರಂಪರೆಯಲ್ಲಿದೆ. ಹಾಗಾಗಿ ಅಂತಹ ಪರಂಪರೆಯನ್ನು ನಮ್ಮ ಇಂದಿನ ಯುವಜನತೆ ಕಲಿಯಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ನಮ್ಮ ಸಂಸ್ಥೆ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಜೀವನವನ್ನು ಅನುಷ್ಠಾನ ಮಾಡಲು ಉತ್ಕೃಷ್ಟ ಶಿಕ್ಷಣವನ್ನು ನೀಡುತ್ತಿದೆ.`

ಬೌದ್ಧಿಕವಾಗಿ ಇದು ಶೀಘ್ರವಾಗಿ ಬೆಳೆಯುವ ಕಾಲ.ಹಾಗಾಗಿ ಈ ಸಂದರ್ಭದಲ್ಲಿ ಬೌಧ್ದಿಕವಾಗಿ ಬೆಳೆಯಲು ಅತ್ಯಂತ ಶಿಸ್ತುಬದ್ಧವಾದ ಜೀವನ ಕ್ರಮವನ್ನು ಅನುಸರಿಸಿ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು.
ಇವರು ಇಲ್ಲಿನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದ 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನೂತನವಾಗಿ ಸೇರ್ಪಡೆಗೊಂಡಿರುವ ಪ್ರಥಮ ವರ್ಷದ
ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಹಾಗೂ ಪೋಷಕರ ಸಭೆ ಸುಸ್ವಾಗತಂ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಮಾತನಾಡಿ, ವಿದ್ಯಾರ್ಥಿಗಳನ್ನು ಸಮಾಜದ ಆಸ್ತಿಯನ್ನಾಗಿಸಬೇಕೆನ್ನುವ ನಿಟ್ಟಿನಲ್ಲಿ ವಿವೇಕಾನಂದ ಸಂಸ್ಥೆ ಹಿರಿಯರ ಮಾರ್ಗದರ್ಶನದಂತೆ ಸಂಸ್ಕಾರವುಳ್ಳ ಹಾಗೂ ಯುವ ಮನಸ್ಸುಗಳಲ್ಲಿ ರಾಷ್ಟ್ರೀಯತೆಯನ್ನು ಮೂಡಿಸಲು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಸ್ವಾಮಿ ವಿವೇಕಾನಂದರ ಆಶಯದಂತೆ ಸದೃಢವಾದ ದೇಶಕ್ಕಾಗಿ ಚಿಂತನೆಯನ್ನು ಮಾಡುವ ವಿದ್ಯಾರ್ಥಿಗಳು ಇಲ್ಲಿ ರೂಪುಗೊಳ್ಳುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಮತ್ತು ಶಿಕ್ಷಕ ರಕ್ಷಕ ಸಂಘದ ಕರ್ಯಕಾರಿ ಸಮಿತಿಗೆ ನೂತನವಾಗಿ ಸೇರ್ಪಡೆಗೊಂಡ
ಸದಸ್ಯರನ್ನು ಅಭಿನಂದಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ ಭಟ್ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ ನಾಯಕ್ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾಲೇಜಿನ ವಿಶೇಷಾಧಿಕಾರಿ ಹಾಗೂ ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್ ವಂದಿಸಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮನಮೋಹನ ಎಂ ನಿರೂಪಿಸಿದರು.














