
ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ಕೊಡುವಂತೆ ಸ್ವಾಮೀಜಿಗಳಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ನಲ್ಲಿ ನಾವು ಎಸ್ಐಟಿ ರಚನೆ ಮಾಡಿದ್ದೇವೆ. ಎಸ್ಐಟಿ ಅವರು ಪೊಲೀಸರೇ ತಾನೆ. ಎನ್ಐಎನಲ್ಲಿ ಇರುವವರು ಯಾರು? ಅವರು ಪೋಲೀಸರೇ ಎನ್ನುವ ಮೂಲಕ ಎಸ್ಐಟಿ ತನಿಖೆಯೇ ಮುಂದುವರೆಯುತ್ತದೆ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದರು.
ಬ್ಯಾಲೆಟ್ ಪೇಪರ್ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡಬೇಕು ಎನ್ನುವುದು ನಮ್ಮ ಉದ್ದೇಶ. ನಮ್ಮ ಅನುಭವದಿಂದ ಈ ತೀರ್ಮಾನ ಮಾಡಿದ್ದೇವೆ. ನಿನ್ನೆ ಕ್ಯಾಬಿನೆಟ್ ನಲ್ಲಿ ನಿರ್ಧಾರ ಮಾಡಿದ್ದೇವೆ ಎಂದರು.
ಅನೇಕ ದೇಶಗಳು ಇವಿಎಂಗೆ ಹೋಗಿ ಮತ್ತೆ ಬ್ಯಾಲೆಟ್ ಪೇಪರ್ಗೆ ಬಂದಿರೋ ನಿರ್ದೇಶನಗಳು ಇವೆ ಎಂದು ಹೇಳುವ ಮೂಲಕ ಬ್ಯಾಲೆಟ್ ಪೇಪರ್ ಚುನಾವಣೆಯನ್ನು ಸಮರ್ಥಿಸಿದರು.














