ಹಾಸನ ದುರಂತ | ಹೆಚ್ಚಿನ ಪರಿಹಾರ ಕೊಡದಿದ್ರೆ ರಾಜೀನಾಮೆ ಕೊಟ್ಟು ಹೋಗಿ ; ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ-ಕಹಳೆ ನ್ಯೂಸ್

ಶಿವಮೊಗ್ಗ: ಮೊಸಳೆಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟುಹೋಗಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಸರ್ಕಾರ ಒಂದು ಸಮುದಾಯದ ಓಲೈಕೆಗೆ ಮುಂದಾಗಿದೆ. ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕಾಣುತ್ತಿದೆ. ಬೇರೆ ಸಮುದಾಯದ ನೋವುಗಳು ಕಾಣುತ್ತಿಲ್ಲ. ಕೇರಳದ ಆನೆಯಿಂದ ಸಾವನಪ್ಪಿದವರಿಗೆ ಪರಿಹಾರ ನೀಡುತ್ತಾರೆ. ಆರ್ಸಿಬಿ ವಿಜಯೋತ್ಸವದಲ್ಲಿ ಸತ್ತವರಿಗೆ ಹೆಚ್ಚಿನ ಪರಿಹಾರ ನೀಡುತ್ತಾರೆ. ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಮೃತಪಟ್ಟವರಿಗೆ ಯಾಕೆ ಹೆಚ್ಚಿನ ಪರಿಹಾರ ಇಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.
ಮಂಡ್ಯದ ಮದ್ದೂರಿನಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮಾಡಲಾಗಿದೆ. ಆದರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಗಲಾಟೆಗಳಿಗೆ ನಮ್ಮ ಮೇಲೆ ಆರೋಪ ಮಾಡುತ್ತೀರಾ? ರಾಜ್ಯದಲ್ಲಿ ಸಂಭವಿಸುತ್ತಿರುವ ಗಲಾಟೆಗೆ ಸಿಎಂ ಸಿದ್ದರಾಮಯ್ಯ ದುರಹಂಕಾರವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.














