
ಕೊಪ್ಪಳ: ತುಂಗಭದ್ರಾ ವ್ಯಾಪ್ತಿಯ ಜಿಲ್ಲೆಗಳ ರೈತರಿಗೆ ಎರಡನೆ ಬೆಳೆಗೆ ನೀರು ಹರಿಸಲೇಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಹೋರಾಟ ರೂಪಿಸಲು ಸಜ್ಜಾಗಿರುವ ಬಿಜೆಪಿ ಬೆಂಗಳೂರಿನಲ್ಲಿ ಶನಿವಾರ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಲು ತೀರ್ಮಾನಿಸಿದೆ.
ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಬಿಜೆಪಿ ಪ್ರಮುಖರು ಮುನಿರಾಬಾದ್ನಲ್ಲಿ ಗುರುವಾರ ಸಭೆ ನಡೆಸಿ ಹೋರಾಟದ ಬಗ್ಗೆ ಚರ್ಚಿಸಿದ್ದರು. ‘ಐಸಿಸಿ ಸಭೆಯಲ್ಲಿ ಎರಡನೇ ಬೆಳೆಗೆ ನೀರು ಹರಿಸಲು ತೀರ್ಮಾನಿಸದಿದ್ದರೆ ಹೋರಾಟ ಕೈಗೊಳ್ಳಲಾಗುವುದು’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದರು. ಈಗ ನೀರು ಹರಿಸಲು ಸಭೆಯಲ್ಲಿ ಒಪ್ಪಿಗೆ ಲಭಿಸದ ಕಾರಣ ನಿಗದಿಯಂತೆ ಸಭೆ ನಡೆಯಲಿದೆ ಎಂದು ವಿಧಾನಪರಿಷತ್ ಸದಸ್ಯೆ ಬಿಜೆಪಿಯ ಹೇಮಲತಾ ನಾಯಕ ತಿಳಿಸಿದರು.









