ಅಗ್ನಿ ದುರಂತದಲ್ಲಿ 25 ಮಂದಿ ಬಲಿ – ಗೋವಾ ನೈಟ್ಕ್ಲಬ್ ಮ್ಯಾನೇಜರ್ ಅರೆಸ್ಟ್, ಮಾಲೀಕನ ವಿರುದ್ಧ ವಾರಂಟ್ – ಕಹಳೆ ನ್ಯೂಸ್

ಪಣಜಿ: ಉತ್ತರ ಗೋವಾದ ಅರ್ಪೋರಾ ನೈಟ್ಕ್ಲಬ್ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್ನ ಮ್ಯಾನೇಜರ್ನನ್ನ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕ್ಲಬ್ ಮಾಲೀಕನ ವಿರುದ್ಧವೂ ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ಪ್ರಧಾನ ವ್ಯವಸ್ಥಾಪಕನನ್ನ ಬಂಧಿಸಲಾಗಿದ್ದು, ಮಾಲೀಕನ ವಿರುದ್ಧವೂ ವಾರಂಟ್ ಜಾರಿಗೊಳಿಸಲಾಗಿದೆ
ಅರ್ಪೋರಾದ ನೈಟ್ ಕ್ಲಬ್ ಅಗ್ನಿ ಅವಘಡ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಡಾ. ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ. ಈಗಾಗಲೇ ಜನರಲ್ ಮ್ಯಾನೇಜರ್ನನ್ನ ಬಂಧಿಸಿದ್ದು, ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಿ ವಾರಂಟ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಕ್ಲಬ್ ಅಗ್ನಿ ಸುರಕ್ಷತಾ ಮಾನದಂಡಗಳನ್ನ ಪಾಲಿಸಿದೆಯೇ ಎಂಬುದನ್ನೂ ಕೂಡ ಪತ್ತೆ ಮಾಡಬೇಕಿದೆ. ಕ್ಲಬ್ ಯಾವ್ಯಾವ ಅನುಮತಿಗಳನ್ನ ಪಡೆದುಕೊಂಡಿದೆ, ಯಾರು ಅನುಮತಿ ಕೊಟ್ಟಿದ್ದಾರೆ ಎಲ್ಲವನ್ನೂ ಬಯಲಿಗೆಳೆಯಬೇಕು ಎಂದು ಸೂಚಿಸಿದ್ದಾರೆ.
ದುರಂತ ನೆನೆದು ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಘಟನೆಯ ಸಂಪೂರ್ಣ ವಿವರ ಪಡೆದುಕೊಂಡಿದ್ದಾರೆ. ಅಲ್ಲದೇ ಕೇಂದ್ರದಿಂದ ಪರಿಹಾರ ಸಹ ಘೋಷಣೆ ಮಾಡಿದ್ದು, ಸಾಧ್ಯವಿರುವ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ ಎಂದು ಪ್ರಮೋದ್ ಸಾವಂತ್ ಹೇಳಿದ್ದಾರೆ.
ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್ನಲ್ಲಿರುವ ಫೇಮಸ್ ನೈಟ್ ಕ್ಲಬ್ನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಲಬ್ ಮುಚ್ಚಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗ ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಘಟನೆಯಲ್ಲಿ ನಾಲ್ವರು ಪ್ರವಾಸಿಗರು, 14 ಮಂದಿ ಕ್ಲಬ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೂ 7 ಮಂದಿ ಗುರುತು ಪತ್ತೆಯಾಗಿ ತನಿಖೆ ನಡೆಯುತ್ತಿದೆ.
ಸದ್ಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಂಡಿದೆ.













