ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: 200 ಮನೆಗಳು ನೆಲಸಮ! ಏನಿದು ಘಟನೆ..?-ಕಹಳೆ ನ್ಯೂಸ್

ಶ್ರೀನಿವಾಸಪುರದ ಕೋಗಿಲು ಲೇಔಟ್ನಲ್ಲಿ ಗೋಮಾಳ ಭೂಮಿಯನ್ನು ನಗರ ಪಾಲಿಕೆಗೆ ಹಸ್ತಾಂತರಿಸಲಾಗಿತ್ತು. ಆದರೆ ಈ ಜಾಗದಲ್ಲಿ ಯಾವುದೇ ಅನುಮತಿ ಇಲ್ಲದೆ ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ನ್ಯಾಯಾಲಯದ ನಿರ್ದೇಶನ ಮತ್ತು ಪೂರ್ವ ನೋಟಿಸ್ ನಂತರವೇ ಈ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ತೆರವು ಕಾರ್ಯಾಚರಣೆಗೆ ಆರು ಜೆಸಿಬಿಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಮಾರು 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಬೆಳಗ್ಗಿನಿಂದಲೇ ಜೆಸಿಬಿಗಳ ಗದ್ದಲ ಆರಂಭವಾಗಿದ್ದು, ಅಕ್ರಮವಾಗಿ ನಿರ್ಮಿಸಿದ್ದ ಸುಮಾರು 200 ಮನೆಗಳನ್ನು ನೆಲಸಮಗೊಳಿಸುವ ಕಾರ್ಯ ನಡೆಯುತ್ತಿದೆ.
ಸ್ಥಳದಲ್ಲಿ ಕೆಲ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದರೂ, ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಪಾಲಿಕೆ ಜಾಗವನ್ನು ರಕ್ಷಿಸುವುದು ಮತ್ತು ಮುಂದಿನ ದಿನಗಳಲ್ಲಿ ಇಂತಹ ಒತ್ತುವರಿಗಳನ್ನು ತಡೆಯುವುದೇ ಈ ಕ್ರಮದ ಉದ್ದೇಶ ಎಂದು ಜಿಲ್ಲಾಡಳಿತ ತಿಳಿಸಿದೆ.











