
ಮಂಗಳೂರು : ಮಂಗಳೂರಿನ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಒಟ್ಟು ₹8 ಲಕ್ಷ 42 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾರ್ಚ್ 18ರಂದು ಬೆಳಗ್ಗೆ 4:45ರ ಸುಮಾರಿಗೆ, ಬಡಗ ಎಡಪದವು ಗ್ರಾಮದ ಸಸ್ತಾವು ಪ್ರದೇಶದಲ್ಲಿ ಫಾರ್ಚೂನರ್ ಕಾರಿನಲ್ಲಿ ನಾಲ್ಕು ದನಗಳನ್ನು ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು. ಎ.ಸಿ.ಪಿ ಶ್ರೀಕಾಂತ್ ಮತ್ತು ಪಿ.ಐ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ, ಪಿ.ಎಸ್.ಐ ಲತಾ ಮತ್ತು ತಂಡ ದಾಳಿ ನಡೆಸಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ . ಪೊಲೀಸರು ನಾಲ್ಕು ದನಗಳು, ಫಾರ್ಚೂನರ್ ಕಾರು, ಒಂದು ತಲವಾರ್ ಮತ್ತು ಕಬ್ಬಿಣದ ರಾಡ್ ವಶಪಡಿಸಿಕೊಂಡಿದ್ದಾರೆ. ಒಟ್ಟು ₹8.42 ಲಕ್ಷ ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಸಾರ್ ಮತ್ತು ಮೊಹಮ್ಮದ್ ಜಮಾಲುದ್ದೀನ್ ಎಂಬ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇನ್ನೂ ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಅಕ್ರಮ ಜಾನುವಾರು ಸಾಗಾಟ ಕುರಿತು ಮಾಹಿತಿ ಇದ್ದರೆ ತಕ್ಷಣ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದ್ದಾರೆ.














