ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ -ಕಹಳೆ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬಿ ಸಮುದ್ರದಲ್ಲಿ ಗಾಳಿ ಒತ್ತಡ ಇರುವುದರಿಂದ ವಿವಿಧೆಡೆ ಗಾಳಿ ಮತ್ತು ಸಿಡಿಲಿನ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ಮಂಗಳವಾರ 33.5 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.4 ಡಿ.ಸೆ. ಇಳಿಕೆ ಮತ್ತು 25.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ಮಾ. 24ರಂದು ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ದ.ಕ. ಜಿಲ್ಲೆಯಲ್ಲಿ 39 ಡಿ.ಸೆ. ಮತ್ತು ಉಡುಪಿ ಜಿಲ್ಲೆಯಲ್ಲಿ 37.4 ಡಿ.ಸೆ. ತಾಪಮಾನ ದಾಖಲಾಗಿತ್ತು.
ಉಡುಪಿ, ಕುಂದಾಪುರ, ಹಿರಿಯಡಕ, ಬೆಳ್ಳರ್ಪಾಡಿ, ಆತ್ರಾಡಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ವೇಳೆ ಗುಡುಗು, ಮಿಂಚಿನೊಂದಿಗೆ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ವಿಪರೀತ ಉಷ್ಣಾಂಶ ದಾಖಲಾಗಿತ್ತು. ಹವಾಮಾನ ಇಲಾಖೆ ವರದಿಯಂತೆ ಮುಂದಿನ ಕೆಲವು ದಿನಗಳವರೆಗೆ ಜಿಲ್ಲೆಯಲ್ಲಿ ಹವಾಮಾನ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಕಡಬ/ಸುಳ್ಯ: ಕಡಬ ತಾಲೂಕು ಸಿರಿಬಾಗಿಲು ಪ್ರದೇಶದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ತಾಲೂಕಿನ ಇತರ ಕಡೆಗಳಲ್ಲಿ ಸಾಧಾರಣ ಮಳೆ ಸುರಿದಿದೆ. ಸುಳ್ಯ ತಾಲೂಕಿನ ಕಲ್ಮಡ್ಕ, ಪಂಜ ಸಹಿತ ವಿವಿಧೆಡೆ ಸಾಧಾರಣ ಮಳೆಯಾಗಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾನಲ್ಲಿಯೂ ಸಾಧಾರಣ ಮಳೆಯಾಗಿದೆ.









