
ಹಾಸನ: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆ ಇಂದು (ಮೇ 6) ಲೋಕಾರ್ಪಣೆಗೊಳ್ಳಲಿದೆ.
ಇದಕ್ಕೂ ಮುನ್ನ 2 ಬಾರಿ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿಕೆಯಾಗಿ ಇದೀಗ ಮೂರನೇ ಬಾರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದು ಸಂಜೆ 4:30ಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸ್ಮಾರಕ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಸಿಮೆಂಟ್ಮಂಜು ಭಾಗಿಯಾಗಲಿದ್ದಾರೆ.
2023ರ ಡಿಸೆಂಬರ್ 4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಡಿ ಅಂಬಾರಿ ಆನೆ ಅರ್ಜುನ ವೀರಮರಣವನ್ನಪ್ಪಿದ್ದ. ಮಾರನೇ ದಿನ ಡಿ.5ರಂದು ಮೃತಪಟ್ಟ ಸ್ಥಳದಲ್ಲೇ ಅರಣ್ಯ ಇಲಾಖೆ ಅಂತ್ಯಸಂಸ್ಕಾರ ನೆರವೇರಿಸಿತ್ತು. ಮೃತಪಟ್ಟ ಎರಡೂವರೆ ವರ್ಷಗಳ ನಂತರ ಇದೀಗ ಅರ್ಜುನನ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ಮಂಗಳವಾರ (ಮೇ 4) ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಶಾಸಕ ಸಿಮೆಂಟ್ಮಂಜು ಅಸಮಾಧಾನ ವ್ಯಕ್ತಪಡಿಸಿ, ಅರ್ಜುನನ ಪ್ರತಿಮೆ ನಿರ್ಮಾಣಗೊಂಡು ಒಂದೂವರೆ ವರ್ಷವಾದರೂ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.









