ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ : ಬೆಂಗಳೂರು ಪೊಲೀಸರಿಂದ ತೀವ್ರ ತನಿಖೆ -ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗಮಧ್ಯೆ ಸ್ಫೋಟಕ ವಸ್ತುವಾದ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ.
ಕಗ್ಗಲೀಪುರ ಬಳಿಯ ರವಿಶಂಕರ್ ಗುರೂಜಿ ಆಶ್ರಮದಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ತಾತಗುಣಿ ಸಮೀಪದ ಬ್ರಿಡ್ಜ್ ಪಕ್ಕದ ಕಾಂಪೌಂಡ್ ಬಳಿ ಕಲ್ಲು ಕ್ವಾರಿಗಳಿಗೆ ಬಳಸುವ ಎರಡು ಜಿಲೆಟಿನ್ ಕಡ್ಡಿ ಪತ್ತೆಯಾಗಿದೆ.
ಪತ್ತೆಯಾಗಿರುವ ಜಿಲೆಟಿನ್ ಕಡ್ಡಿಗಳು ‘ಲೈವ್’ (ಸಕ್ರಿಯ) ಸ್ಥಿತಿಯಲ್ಲಿ ಇರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದು ನಿರಾಳತೆಯನ್ನು ತಂದಿದ್ದರೂ, ಭದ್ರತಾ ಲೋಪದ ಹಿನ್ನೆಲೆಯಲ್ಲಿ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಪ್ರಧಾನಿಗಳು ಬರುವ ಮೊದಲೇ ಜಾಗರೂಕತೆಯಿಂದ ಕಾರ್ಯನಿರ್ವಹಿಸಿದ ಪೊಲೀಸರು ಸ್ಫೋಟಕಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ವಿಭಾಗದ ಡಿಐಜಿ ಗಿರೀಶ್ ಅವರ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ.
ಜಿಲೆಟಿನ್ ಕಡ್ಡಿ ಪತ್ತೆಯಾದ ಬೆನ್ನಲ್ಲೇ ಡಿಐಜಿ ಗಿರೀಶ್ ಅವರು ಕಗ್ಗಲಿಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಎಸ್ಪಿ ಶ್ರೀನಿವಾಸ್ ಗೌಡ ಅವರು ಕೂಡ ಉಪಸ್ಥಿತರಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಘಟನೆಯ ತನಿಖೆಯ ಪ್ರಗತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ.
ರವಿಶಂಕರ್ ಆಶ್ರಮದ ವಿರೋಧಿಗಳು ಅಥವಾ ಕಿಡಿಗೇಡಿಗಳು ಈ ಕೃತ್ಯ ಎಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸ್ಫೋಟಕಗಳನ್ನು ಇಂದು ಎಸೆಯಲಾಗಿದೆಯೇ ಅಥವಾ ಕೆಲವು ದಿನಗಳ ಹಿಂದೆಯೇ ಇಲ್ಲಿ ಹಾಕಲಾಗಿದ್ದವೇ ಎಂಬ ಬಗ್ಗೆ ಪೊಲೀಸರು ತಾಂತ್ರಿಕ ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದಾರೆ.
ಪ್ರಸ್ತುತ ಅನಾಮಧೇಯ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಹೆಚ್ಎಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರು ಹೆಚ್ಎಎಲ್ ಪಾರ್ಕಿಂಗ್ ಜಾಗದಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ರಾಜಕೀಯ ಕಾರ್ಯಕ್ರಮದ ಬಳಿಕ ಪ್ರಧಾನಿಯವರು ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ತೆರಳಲಿರುವ ಅವರು ಅಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಧ್ಯಾನ ಮಂದಿರವನ್ನು ಉದ್ಘಾಟಿಸಿದ್ದರು.









