
ಮಂಡ್ಯ: ಹಲವು ದಿನಗಳಿಂದ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಜರುಗಿದೆ.
ಚಿಂದಗಿರಿಕೊಪ್ಪಲು ಗ್ರಾಮ ಜಮೀನು ಪ್ರದೇಶದಲ್ಲಿ ಹಲವು ದಿನಗಳಿಂದ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಈ ಭಾಗದ ಜನರು ಜಮೀನಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿತ್ತು. ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಆಗ್ರಹ ಮಾಡಿದ್ದರು.
ಇದರ ಬೆನ್ನಲ್ಲೇ ಬೋನಿನಲ್ಲಿ ನಾಯಿ ಇರಿಸಲಾಗಿತ್ತು. ಕಳೆದ ರಾತ್ರಿ ಬೋನಿನಲ್ಲಿ ಇರಿಸಿದ್ದ ನಾಯಿಯನ್ನು ತಿನ್ನಲು ಬಂದ ವೇಳೆ ಚಿರತೆ ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದ ಚಿರತೆಯನ್ನು ನೋಡಲು ಅಕ್ಕ-ಪಕ್ಕದ ಗ್ರಾಮದ ಜನರು ಮುಗಿಬಿದ್ದಿದ್ದರು. ಸದ್ಯ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯ ಪ್ರದೇಶಕ್ಕೆ ಬಿಡಲು ನಿರ್ಧಾರ ಮಾಡಿದೆ.










