
ಬಂಟ್ವಾಳ : ಸೀಮಂತ ಕಾರ್ಯಕ್ರಮ ಮುಗಿಸಿ ಸಂತೋಷದಿಂದ ಮನೆಗೆ ಮರಳುತ್ತಿದ್ದ ಕುಟುಂಬಕ್ಕೆ ವಿಧಿ ಹೆದ್ದಾರಿಯಲ್ಲೇ ಮೃತ್ಯುವಾಗಿ ಕಾಡಿದೆ.
ಮಿನಿ ಬಸ್ವೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಂಟ್ವಾಳ ಸಮೀಪದ ಪುದು ಗ್ರಾಮದಲ್ಲಿ ಸಂಭವಿಸಿದೆ.
ಮಂಗಳೂರು ಮೂಲದ ವಿಕಾಸ್ ಎಂಬ ಯುವಕನೇ ಈ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ವಿಕಾಸ್ ಮತ್ತು ಅವರ ಸಂಬಂಧಿಕರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ನಡೆದ ಸೀಮಂತ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿಸಿ ಎಲ್ಲರೂ ಸಡಗರದಿಂದಲೇ ಮಿನಿ ಬಸ್ನಲ್ಲಿ ಮಂಗಳೂರಿಗೆ ವಾಪಸ್ಸಾಗುತ್ತಿದ್ದರು.
ಆದರೆ, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ಪುದು ಗ್ರಾಮದ 10ನೇ ಮೈಲಿಗಲ್ಲು ಎಂಬಲ್ಲಿಗೆ ಬರುತ್ತಿದ್ದಂತೆ, ವಿಧಿಯ ಆಟ ಬದಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್, ರಸ್ತೆಯ ಮಧ್ಯದಲ್ಲಿದ್ದ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ರಸ್ತೆ ಮಧ್ಯದಲ್ಲೇ ಪಲ್ಟಿಯಾಗಿದೆ.
ಈ ಭೀಕರ ಅಪಘಾತದ ತೀವ್ರತೆಗೆ ಬಸ್ನಲ್ಲಿದ್ದ ಒಟ್ಟು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ವಿಕಾಸ್ ಅವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿತ್ತು. ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರ ನೆರವಿನಿಂದ ಗಾಯಾಳುಗಳನ್ನೆಲ್ಲಾ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಯುವಕ ವಿಕಾಸ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಉಳಿದ 8 ಮಂದಿ ಪ್ರಯಾಣಿಕರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.











