ದಾವಣಗೆರೆಯಲ್ಲಿ ಇಲ್ಲ ಮಳೆ; ಮೈದುಂಬಿ ಹರಿದ ತುಂಗಭದ್ರಾ : ಉಕ್ಕಡಗಾತ್ರಿ ಸ್ನಾನಘಟ್ಟ, ಅಂಗಡಿಗಳು ಜಲಾವೃತ – ಕಹಳೆ ನ್ಯೂಸ್

ದಾವಣಗೆರೆ: ಮಲೆನಾಡು ಭಾಗದಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಉಕ್ಕಡಗಾತ್ರಿ ಅಜ್ಜಯ್ಯನ ದೇವಸ್ಥಾನದ ಮುಂಭಾಗಕ್ಕೆ ನದಿಯ ನೀರು ನುಗ್ಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಸದ್ಯ ಮಳೆಯಿಲ್ಲದಿದ್ದರೂ, ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಗಾಜನೂರು ಬಳಿ ತುಂಗಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಇದರಿಂದಾಗಿ ತುಂಗಭದ್ರಾ ನದಿ ಸಂಪೂರ್ಣ ಮೈದುಂಬಿ ಹರಿಯುತ್ತಿದ್ದು, ನದಿ ತೀರದ ಜನರಲ್ಲಿ ಆತಂಕ ಮೂಡಿಸಿದೆ.
ನದಿಯ ನೀರಿನ ಮಟ್ಟ ದಿಢೀರ್ ಏರಿಕೆಯಾದ ಹಿನ್ನೆಲೆಯಲ್ಲಿ, ಭಕ್ತರು ಪವಿತ್ರ ಸ್ನಾನ ಮಾಡುವ ಉಕ್ಕಡಗಾತ್ರಿ ಕ್ಷೇತ್ರದ ಪ್ರಮುಖ ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದೆ.









