ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ- ಕಹಳೆ ನ್ಯೂಸ್

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕೆ.ಆರ್ ಪೇಟೆಯಲ್ಲಿ ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮೇ 28 ರಂದು ರಾಜೀನಾಮೆ ಸಲ್ಲಿಸಿದ್ದರು. ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಚರಿತ್ರೆಯ ದಣಿವರಿಯದ ಹೋರಾಟಗಾರ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿತ್ತು. ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿಯವರ ಸಂದೇಶಕ್ಕೆ ಗೌರವ ನೀಡಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ರಾಜ್ಯ ರಾಜಕಾರಣದ ಮಹತ್ವದ ಹಂತವೊಂದಕ್ಕೆ ಭಾವುಕ ತೆರೆ ಎಳೆದಿದ್ದರು.
ಮೈಸೂರು ರಾಜಕಾರಣದ ಮಣ್ಣಿನಲ್ಲಿ ಹುಟ್ಟಿದ, ಹೋರಾಟದಲ್ಲಿ ಬೆಳೆದ, ಅಧಿಕಾರ ತ್ಯಾಗ, ಅಧಿಕಾರ ವಂಚಿತ, ಅಧಿಕಾರ ಅನುಭವಿಸಿದ ರಾಜಕಾರಣಿ ಅಂದರೆ ಅದು ಸಿದ್ದರಾಮಯ್ಯ ಮಾತ್ರ. ಕರ್ನಾಟಕ ರಾಜಕಾರಣದಲ್ಲಿ ಕೆಲವರು ಹುದ್ದೆ ಹಿಡಿದು ದೊಡ್ಡವರಾಗುತ್ತಾರೆ. ಕೆಲವರು ದೊಡ್ಡವರಾಗಿದ್ದರಿಂದ ಹುದ್ದೆ ಹುಡುಕಿಕೊಂಡು ಬರುತ್ತದೆ. ಆದರೆ ಸಿದ್ದರಾಮಯ್ಯ ಈ ಎರಡಕ್ಕಿಂತಲೂ ವಿಭಿನ್ನವಾದವರು.
ಸಿದ್ದರಾಮಯ್ಯ ಕೇವಲ ಮುಖ್ಯಮಂತ್ರಿ ಅಗಿರಲಿಲ್ಲ. ಸಿದ್ದರಾಮಯ್ಯ ಕೇವಲ ಒಬ್ಬ ರಾಜಕೀಯ ನಾಯಕ ಅಲ್ಲ. ಬದಲಾಗಿ ಸಿದ್ದರಾಮಯ್ಯ ಅಂದರೆ ಒಂದು ವರ್ಗದ ಕೋಪದ ಧ್ವನಿ, ಒಂದು ಸಮಾಜದ ಆತ್ಮಗೌರವ, ಮೈಸೂರಿನ ಮಣ್ಣಿನ ದನಿ, ಹಿಂದುಳಿದವರ ರಾಜಕೀಯಾದ ಭಾಷೆ ಎಂಬ ಮಟ್ಟಿಗೆ ರಾಜಕಾರಣ ಮಾಡಿದ್ದಾರೆ. ಮೈಸೂರು ಭಾಗದ ರಾಜಕೀಯವನ್ನ ದೇವರಾಜ ಅರಸು ಅವರು ʻಶಕ್ತಿಯ ಸಮೀಕರಣʼ ಎಂದು ಬದಲಾಯಿಸಿದ್ದರೆ, ಸಿದ್ದರಾಮಯ್ಯ ಅದನ್ನ ʻಸಾಮಾಜಿಕ ನ್ಯಾಯದ ಯುದ್ಧʼ ಆಗಿ ಮಾಡಿದವರು. ಅವರ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆಯ ನಿರ್ಧಾರದಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ.











