
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಳೆ ಬಿರುಸು ಪಡೆಯುತ್ತಿದೆ. ಕಳೆದ ಎರಡು ದಿನದಿಂದ ಜಿಲ್ಲೆಯಲ್ಲಿ ಗಾಳಿ ಮಳೆ ಚುರುಕು ಪಡೆದಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.
ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ.
ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2,857.88 ಅಡಿಗಳಿಗೆ ತಲುಪಿದೆ. ಜಲಾಶಯಕ್ಕೆ 4,008 ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ. 3,700 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹೊರಬಿಡಲಾಗುತ್ತಿದೆ. ಮತ್ತೆ ಮಳೆ ಚುರುಕಾದ ಹಿನ್ನಲೆ ಕೊಡಗಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.











