ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆ.6ರಂದು ಜರಗಿತು.
ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ರೋ.ಶ್ರೀಧರ್ ಕೆ.ವಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಈಗಿಂದಲೇ
ಸೇವಾ ಮನೋಭಾವ ಹೊಂದಬೇಕು. ಜೀವನದಲ್ಲಿ ಶಿಸ್ತು,ಮೌಲ್ಯ, ಸಂಸ್ಕಾರಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಒಳ್ಳೆಯ ಮಾನವರಾಗಿ ಬದುಕಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ಸೋಮಶೇಖರ ಶೆಟ್ಟಿ ಮಾತನಾಡಿ, ಶಿಸ್ತು ಶಿಕ್ಷಣದ ಅವಿಭಾಜ್ಯ ಅಂಗವಾಗಬೇಕು, ಸಹವಾಸದಂತೆ ವ್ಯಕ್ತಿತ್ವವಿರುತ್ತದೆ ಒಳ್ಳೆಯ ಗೆಳೆಯರನ್ನು ಆಯ್ಕೆ ಮಾಡಿಕೊಂಡಾಗ ಒಳ್ಳೆಯ ಗುಣವಿರುತ್ತದೆ, ಮಾದಕ ವಸ್ತುಗಳಿಂದ ದೂರವಿದ್ದು, ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿ ದುಶ್ಚಟಕ್ಕೆ ಬೀಳಬಾರದು ಎಂದು ತಿಳಿಸಿದರು.
ಇಂಟ್ರಾಕ್ಟ್ ಕ್ಲಬ್ಬಿನ ಹೊಸ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು.
ಬೆಳ್ತಂಗಡಿ ರೋಟರಿ ಕ್ಲಬ್ಬಿನ ವತಿಯಿಂದ 8, 9 ಮತ್ತು 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು.
ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಮೀಳಾ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸಫೀರ ಸ್ವಾಗತಿಸಿ, ಚೇತನ ವಂದಿಸಿದರು. ಆತ್ಮಿ ಮತ್ತು ನೇತ್ರಾವತಿ ಕಾರ್ಯಕ್ರಮ ನಿರೂಪಿಸಿದರು.











