ಸಲಿಂಗ ಪ್ರೀತಿಗೆ ಕುಟುಂಬದ ವಿರೋಧ; ಮನನೊಂದು ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಯುವತಿಯರು – ಕಹಳೆ ನ್ಯೂಸ್

ಬೆಂಗಳೂರು: ಸಲಿಂಗ ಪ್ರೀತಿಗೆ ಕುಟುಂಬದವರು ಒಪ್ಪದ ಕಾರಣ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ಶಿವನಹಳ್ಳಿಯಲ್ಲಿ ನಡೆದಿದೆ.
ಸಿರ್ಜನಾ (22) ಮತ್ತು ರೀಟಾ (23) ಮೃತ ಯುವತಿಯರು. ಇಬ್ಬರೂ ಬೆಂಗಳೂರಿನಲ್ಲಿ ಬೇರೆ ಬೇರೆ ಅಪಾರ್ಟ್ಮೆಂಟ್ಗಳಲ್ಲಿ ಮನೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇಬ್ಬರೂ ಸಂಬಂಧಿಕರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು.
ಮದುವೆಯಾಗುವಂತೆ ಕುಟುಂಬದಿಂದ ಒತ್ತಡವಿತ್ತು. ಆದರೆ, ಇವರಿಬ್ಬರೂ ಸಲಿಂಗಕಾಮಿಗಳಾಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರದಿಂದ ಇಬ್ಬರೂ ಮಾನಸಿಕವಾಗಿ ನೊಂದಿದ್ದರು ಎಂದು ಸಂಬಂಧಿಕರ ವಿಚಾರಣೆಯಲ್ಲಿ ತಿಳಿದುಬಂದಿದೆ. ಇದರ ನಡುವೆ ಇಬ್ಬರೂ ಬೇರೆ ಬೇರೆ ಕಡೆ ವಾಸವಾಗಿದ್ದರಿಂದ ಒಟ್ಟಿಗೆ ಇರಲು ಸಾಧ್ಯವಾಗುತ್ತಿರಲಿಲ್ಲ. ಈ ವಿಚಾರವೂ ಇಬ್ಬರಿಗೂ ಬೇಸರ ಮೂಡಿಸಿತ್ತು ಎನ್ನಲಾಗಿದೆ.
ಘಟನೆಗೂ ಮುನ್ನ ಇಬ್ಬರೂ ಬೆಳಗ್ಗೆ ಮನೆಯಿಂದ ಹೊರಗೆ ಹೋಗಿ ಸಂಜೆ ವಾಪಸ್ ಬರುವುದಾಗಿ ಕುಟುಂಬದವರಿಗೆ ಹೇಳಿದ್ದರು. ಬಳಿಕ ಯಲಹಂಕದ ಶಿವನಹಳ್ಳಿ ಬಳಿಯ ನಿರ್ಜನ ಪ್ರದೇಶಕ್ಕೆ ತೆರಳಿದ್ದರು. ಮರುದಿನ ಬೆಳಗ್ಗೆ ಸಾರ್ವಜನಿಕರು ಇಬ್ಬರೂ ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಯಲಹಂಕ ಓಲ್ಡ್ ಟೌನ್ ಪೊಲೀಸರು ಹಾಗೂ ಫಾರೆನ್ಸಿಕ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಆರಂಭದಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿರಲಿಲ್ಲ. ಹೀಗಾಗಿ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಆದರೆ, ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
2 ಕಿ.ಮೀ ದೂರದಲ್ಲಿ ಮತ್ತೊಂದು ಶವ ಪತ್ತೆ
ಇಬ್ಬರು ಯುವತಿಯರು ಆತ್ಮಹತ್ಯೆ ಮಾಡಿಕೊಂಡ ಸ್ಥಳದಿಂದ ಸುಮಾರು 2 ಕಿಲೋಮೀಟರ್ ದೂರದಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿರುವುದು ಇದೀಗ ಕುತೂಹಲ ಮೂಡಿಸಿದೆ. ಜಕ್ಕೂರು ಶ್ರೀರಾಮಪುರ ಬಳಿಯ ರೈಲ್ವೆ ಹಳಿಯಲ್ಲಿ ಯುವಕನೊಬ್ಬ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ.
ಈ ಯುವಕನ ಸಾವಿಗೂ ಇಬ್ಬರು ಯುವತಿಯರ ಪ್ರಕರಣಕ್ಕೂ ಯಾವುದೇ ಸಂಬಂಧವಿದೆಯೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಪೊಲೀಸರು ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಎರಡೂ ಘಟನೆಗಳ ನಡುವೆ ಲಿಂಕ್ ಇದೆಯೇ ಎಂಬುದನ್ನು ತನಿಖೆ ಮೂಲಕ ಪರಿಶೀಲಿಸಲಾಗುತ್ತಿದೆ.











