
ಪುತ್ತೂರು : ವಿವಿಧ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮುಗಿಸಿ ಉನ್ನತ ವ್ಯಾಸಂಗಕ್ಕಾಗಿ ವಿವೇಕಾನಂದ ಕಾಲೇಜನ್ನು ಆಯ್ಕೆ ಮಾಡಿಕೊಂಡಿರುವುದು ವಿದ್ಯಾರ್ಥಿಗಳ ಉತ್ತಮ ನಿರ್ಧಾರ. ಸ್ನಾತಕೋತ್ತರ ವಾಣಿಜ್ಯ ವಿಭಾಗ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ರಸಾಯನಶಾಸ್ತ್ರ, ಗಣಿತಶಾಸ್ತ್ರ ವಿಭಾಗವಿದ್ದು, ಇಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅನೇಕ ವಿದ್ಯಾರ್ಥಿಗಳು ಹಲವಾರು ಕಡೆ ಉನ್ನತ ಉದ್ಯೋಗವಕಾಶಗಳನ್ನು ಪಡೆದುಕೊಂಡು ಸಮಾಜದ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಿರುವ
ಎಲ್ಲಾ ವಿಷಯಗಳು, ಉತ್ತಮ ಗ್ರಂಥಾಲಯ ವ್ಯವಸ್ಥೆ, ನುರಿತ ಉಪನ್ಯಾಸಕ ವೃಂದವನ್ನು ಕಾಲೇಜು ಹೊಂದಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ
ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ಪುತ್ತೂರು, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರದ ವತಿಯಿಂದ ನಡೆದ 2026-27ನೇ ಸಾಲಿನ ನೂತನ ವಿದ್ಯಾರ್ಥಿಗಳ ಸ್ವಾಗತ ಮತ್ತು ಮಾಹಿತಿ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದರು.
ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ಡೀನ್ ಡಾ.ವಿಜಯಸರಸ್ವತಿ.ಬಿ ಮಾತನಾಡಿ, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಉದ್ಯೋಗವಕಾಶಗಳು ದೊರಕುತ್ತದೆ.
ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯ ಮುಖೇನ ಅಗಾಧ ಜ್ಞಾನವನ್ನು ತಮ್ಮದಾಗಿಸಿಕೊಳ್ಳಬೇಕು. ಕಲಿಕೆಯು ಕೇವಲ ತರಗತಿಗೆ ಮಾತ್ರ ಸೀಮಿತವಾಗಿರದೆ ಪಠ್ಯದ ಜೊತೆಗೆ ಇತರೆ ಸರ್ಟಿಫಿಕೇಟ್ ಕೋಸ್ ಗಳನ್ನು ಆಯ್ಕೆಮಾಡಿಕೊಳ್ಳಬೇಕು. ಸ್ನಾತಕೋತ್ತರ ಪದವಿಯ ಈ ಎರಡು ವರ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಹೇಳಿದರು.
ಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಪ್ರೊ.ಪ್ರಕಾಶ್ ಕುಮಾರ್ ಅವರು ಪರೀಕ್ಷಾ ವ್ಯವಸ್ಥೆ ಮತ್ತು ವಿಧಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮೈಕ್ರೋಸಾಫ್ಟ್ ಎಕ್ಸೆಲ್ ಅಡ್ವಾನ್ಸ್ ಕೋರ್ಸ್ನಲ್ಲಿ ಪಾಲ್ಗೊಂಡ ಹಿರಿಯ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯಕ್ರಮವನ್ನು ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ.ಹರ್ಷಿತಾ.ಕೆ.ಆರ್ ಸ್ವಾಗತಿಸಿ, ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಉಪನ್ಯಾಸಕಿ ಶಿಲ್ಪಾ ವಂದಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಶಾಲಿನಿ ನಿರೂಪಿಸಿದರು.











