
ಮಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯದ ಕೊರತೆಯಿಂದಾಗಿ ಹಾಜರಾಗಲು ಸಾಧ್ಯವಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ಅವರು ನೀಡಿರುವ ಹೇಳಿಕೆ ಸಂವಿಧಾನಕ್ಕೆ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟದ ಗೌರವಕ್ಕೆ ಅಪಚಾರವಾಗಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟುವಾಗಿ ಖಂಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಸಚಿವರೊಬ್ಬರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳಲು ಸಮಯವಿಲ್ಲ ಎಂದು ಹೇಳಿರುವುದು ಬಾಲಿಶ ಹಾಗೂ ಹಾಸ್ಯಾಸ್ಪದ ಹೇಳಿಕೆಯಾಗಿದೆ. ಇಂತಹ ಹೇಳಿಕೆಯಿಂದ ಇಡೀ ಕರ್ನಾಟಕವೇ ತಲೆತಗ್ಗಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಬದಲು, ಮುಖ್ಯಮಂತ್ರಿ ಅವರು ಅವರನ್ನು ಸಂಪುಟದಿಂದ ವಜಾಗೊಳಿಸುವುದನ್ನು ಬಿಟ್ಟು, ಅವರ ಮನವಿಯನ್ನು ಮನ್ನಿಸಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬದಲಿ ವ್ಯವಸ್ಥೆ ಮಾಡಿರುವುದು ಸರಿಯಲ್ಲ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಟೀಕಿಸಿದ್ದಾರೆ.
“ನಾನು ಒಬ್ಬ ಸೈನಿಕನಾಗಿ, ಸಂಸತ್ ಸದಸ್ಯನಾಗಿ ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿ ಈ ಬೆಳವಣಿಗೆಯನ್ನು ಕಟುವಾಗಿ ಖಂಡಿಸುತ್ತೇನೆ. ಮುಖ್ಯಮಂತ್ರಿ ಅವರು ಕೂಡಲೇ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಕನ್ನಡಿಗರ, ಕನ್ನಡ ನಾಡಿನ ಹಾಗೂ ಕರ್ನಾಟಕದ ಸ್ವಾಭಿಮಾನವನ್ನು ಉಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಅವರು ಆಗ್ರಹಿಸಿದ್ದಾರೆ.











