
ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ ಮಗ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಅಭಿನವ್ (38) ಹಾಗೂ ಅವರ ಮಗ ಯದುವೀರ್ (5) ಮೃತ ದುರ್ದೈವಿಗಳು.
ಮೇಲ್ನೋಟಕ್ಕೆ ಇಬ್ಬರ ಸಾವಿನ ಹಿಂದೆಯೂ ಕೊಲೆ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಘಟನೆ ನಡೆದ ವೇಳೆ ಮೃತರ ಪತ್ನಿ ಪಕ್ಕದ ರೂಮ್ನಲ್ಲಿದ್ದಳು ಎನ್ನಲಾಗಿದ್ದು, ಈ ವಿಚಾರ ಪೊಲೀಸರಿಗೆ ಅನುಮಾನ ಮೂಡಿಸಿದೆ. ಹೀಗಾಗಿ ಪೊಲೀಸರು ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಾಣವಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ತಂದೆ-ಮಗನ ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.










