ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ಪ್ರಕರಣ ದಾಖಲಿಸಿ, ಗಡಿಪಾರು ಮಾಡಬೇಕು: ಬೊಮ್ಮಾಯಿ -ಕಹಳೆ ನ್ಯೂಸ್

ಹಾವೇರಿ: ಶಿಗ್ಗಾವಿಯ ಹನುಮಾನ್ ದೇವಸ್ಥಾನದಲ್ಲಿ ಅನ್ಯಕೋಮಿನ ವ್ಯಕ್ತಿ ಪ್ರಜ್ಞಾಪೂರ್ವಕವಾಗಿ ಮೂತ್ರ ವಿಸರ್ಜನೆ ಮಾಡಿದ್ದು, ಅವನು ಕೋಮು ಗಲಭೆ ಸೃಷ್ಟಿಸುವ ಕೆಲಸ ಮಾಡಿದ್ದಾನೆ. ಪೊಲೀಸರು ಅವನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಈ ಹಿನ್ನೆಲೆಯಲ್ಲಿ ಶಿಗ್ಗಾವಿ ಬಂದ್ಗೆ ಎಲ್ಲ ಕೋಮಿನವರೂ ಬೆಂಬಲ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಆಗಸ್ಟ್ 21ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಟ್ಯಾಕ್ಸಿ ಸ್ಟ್ಯಾಂಡ್ನಲ್ಲಿರುವ ಶ್ರೀ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಬೊಮ್ಮಾಯಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಇದು ಅತ್ಯಂತ ಹೇಯ ಹಾಗೂ ಕ್ಷಮಿಸಲಾರದ ಕೃತ್ಯ. ದೇವಸ್ಥಾನ ರಸ್ತೆಗಿಂತ ಎತ್ತರದಲ್ಲಿದ್ದು, ಗೇಟ್ ಕೂಡ ಇದೆ. ಗೇಟ್ ತೆಗೆದು ಒಳಗೆ ಪ್ರವೇಶಿಸಿ ಹನುಮಂತ ದೇವರ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಲಾಗಿದೆ. ಆತ ಕುಡಿತದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಅನಿಸುವುದಿಲ್ಲ. ಉದ್ದೇಶಪೂರ್ವಕವಾಗಿಯೇ ಮಾಡಿರುವ ಸಾಧ್ಯತೆ ಇದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು.











