ರಾಯರ 355ನೇ ಆರಾಧನಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ : ಮಂತ್ರಾಲಯದಲ್ಲಿ 7 ದಿನ ಧಾರ್ಮಿಕ, ಸಾಂಸ್ಕೃತಿಕ ವೈಭವ – ಕಹಳೆ ನ್ಯೂಸ್

ರಾಯಚೂರು: ಕಲಿಯುಗದ ಕಾಮಧೇನು ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಮಂತ್ರಾಲಯದಲ್ಲಿ ಅದ್ದೂರಿ ಚಾಲನೆ ಸಿಕ್ಕಿದೆ. ಮಠದ ಆವರಣದಲ್ಲಿ ಧ್ವಜಾರೋಹಣ ನಡೆಸುವ ಮೂಲಕ ಶ್ರೀ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಅವರು ಸಪ್ತರಾತ್ರೋತ್ಸವಕ್ಕೆ ಚಾಲನೆ ನೀಡಿದರು.
ಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ ಏಳು ದಿನಗಳ ಕಾಲ ಸಪ್ತರಾತ್ರೋತ್ಸವ ನಡೆಯಲಿದೆ. ತಿರುಪತಿ ತಿರುಮಲ ದೇವಾಲಯದಿಂದ ಮಠಕ್ಕೆ ಬಂದ ಶ್ರೀನಿವಾಸ ದೇವರ ಶೇಷವಸ್ತ್ರವನ್ನ ರಾಯರ ವೃಂದಾವನಕ್ಕೆ ಸಮರ್ಪಿಸಲಾಗಿದೆ. ಸಪ್ತರಾತ್ರೋತ್ಸವಕ್ಕೆ ಚಾಲನೆ ನೀಡಿದ ಶ್ರೀಗಳು ನೆರೆದಿದ್ದ ಭಕ್ತರಿಗೆ ಆಶೀರ್ವಚನ ನೀಡಿದ್ದಾರೆ.
ಆಗಸ್ಟ್ 29ಕ್ಕೆ ಪೂರ್ವಾರಾಧನೆ, 30ಕ್ಕೆ ಮಧ್ಯಾರಾಧನೆ, 31ಕ್ಕೆ ಉತ್ತರಾರಾಧನೆ ನೆರವೇರಲಿವೆ. ಮಠದ ಆವರಣದಲ್ಲಿನ ಪರಿಮಳ ತೀರ್ಥ ಪುಷ್ಕರಣಿಯಲ್ಲಿ ತೆಪ್ಪೋತ್ಸವ ನಡೆಯಲಿದೆ. ಆಗಸ್ಟ್ 29ರಂದು ಮಠದಿಂದ ಸಾಧಕರಿಗೆ ರಾಘವೇಂದ್ರ ಗುರು ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಆಗಸ್ಟ್ 31ರಂದು ಮಹಾರಥೋತ್ಸವ ನಡೆಯಲಿದ್ದು, ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ನಡೆಯಲಿದೆ. ಇನ್ನೂ ರಾಯರ ಮಠದಲ್ಲಿ ವಿದ್ಯುತ್ ಅಲಂಕಾರ ಭಕ್ತರ ಕಣ್ಮನ ಸೆಳೆಯುತ್ತಿದ್ದು, ಆರಾಧನಾ ಮಹೋತ್ಸವದ ವೈಭವಕ್ಕೆ ದೇಶದ ಮೂಲೆಮೂಲೆಯಿಂದ ಆಗಮಿಸುತ್ತಿರುವ ಭಕ್ತರು ಸಾಕ್ಷಿಯಾಗುತ್ತಿದ್ದಾರೆ.











