
ಹೊಸ ವರ್ಷದ ಆಚರಣೆಗೆ ದಿನಗಣನೆ ಆರಂಭವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಉತ್ತರಪ್ರದೇಶದ ವಿವಿಧ ನಗರಗಳ 17 ಕಡೆ ದಾಳಿ ನಡೆಸಿ 10 ಶಂಕಿತ ಉಗ್ರರನ್ನು ಬಂಧಿಸಿರುವ ಬೆನ್ನಲ್ಲೇ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ.
ಕೇಂದ್ರ ಗುಪ್ತಚರ ಇಲಾಖೆಯಿಂದ ರಾಜ್ಯಕ್ಕೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಹೊಸ ವರ್ಷದಂದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಧಾರ್ಮಿಕ ಕೇಂದ್ರಗಳು, ಪ್ರವಾಸಿ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ಕರಿನೆರಳು ಬೀರುವ ಸಾಧ್ಯತೆ ಇದ್ದು, ಎಲ್ಲೆಡೆ ತೀವ್ರ ನಿಗಾ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ.
ಬೆಂಗಳೂರು, ಬೆಳಗಾವಿ, ಮೈಸೂರು, ಹುಬ್ಬಳ್ಳಿ ಮತ್ತು ಮಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮುನ್ನೆಚ್ಚರಿಕೆ ದೃಷ್ಟಿಯಿಂದ ಬೆಂಗಳೂರಿನ ಪ್ರಮುಖ ಪ್ರದೇಶಗಳು, ಮಾಲ್ಗಳು, ಜನನಿಬಿಡ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಪೊಲೀಸರು ತಾಕೀತು ಮಾಡಿದ್ದಾರೆ.














