
ಉತ್ತರ ಭಾಗದ ಜನರು ಅನುಭವಿಸುತ್ತಿರುವ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರವಾಗಿ ಯೋಜನೆ ಮಾಡಿಯೇ ತೀರುತ್ತೇವೆ. ಅಗತ್ಯವಾದರೆ ಸಲಹೆ ನೀಡಲಿ, ಯೋಜನೆಯೇ ಬೇಡ ಎಂದು ಬೆದರಿಕೆ ಹಾಕಿದರೆ ಸರ್ಕಾರ ಕೇಳುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು ಕೇಂದ್ರ ಭಾಗದಿಂದ ಉತ್ತರ ಭಾಗಕ್ಕೆ ಸಂಪರ್ಕ ಕಲ್ಪಿಸಲು ಸ್ಟೀಲ್ ಬ್ರಿಡ್ ಯೋಜನೆ ಅನಿವಾರ್ಯ. ಕಳೆದ ಸರ್ಕಾರದ ಅವಧಿಯಲ್ಲಿ ಯೋಜನೆಗೆ ವಿರೋಧ ವ್ಯಕ್ತಪಡಿಸಿದವರಿಗೆ ಗೌರವ ನೀಡಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆ ಹಿಂಪಡೆದಿದ್ದಾರೆ. ಸಿದ್ದರಾಮಯ್ಯ ಅವರ ಸ್ಥಾನದಲ್ಲಿ ನಾನು ಇದ್ದಿದ್ದರೆ ಹಿಂದಕ್ಕೆ ಸರಿಯುತ್ತಿರಲಿಲ್ಲ’ ಎಂದರು.
ಉತ್ತರ ಭಾಗದ ಜನರಿಗೆ ನಗರಕ್ಕೆ ಸಂಪರ್ಕ ಕಲ್ಪಿಸಬೇಕಾದ ಅನಿವಾರ್ಯತೆ ಇದೆ. ಹೆಬ್ಬಾಳದಿಂದ ನಗರ ಕೇಂದ್ರ ಭಾಗಕ್ಕೆ ಬರಲು ಸಂಚಾರ ದಟ್ಟಣೆಯಲ್ಲೇ ಹೆಚ್ಚು ಸಮಯ ವ್ಯರ್ಥವಾಗುತ್ತಿದೆ. ಸಾರ್ವಜನಿಕರಿಗೆ ಸಮಯ ತುಂಬಾ ಅಮೂಲವ್ಯವಾದದ್ದು. ಹೀಗಾಗಿ ಸಾರ್ವಜನಿಕರ ಸಮಯ ಉಳಿತಾಯ ಮಾಡಲು ಯೋಜನೆ ಅಗತ್ಯ ಎಂದರು.
ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಲು ಸರ್ಕಾರ ಮುಂದಾದರೆ ವಿರೋಧ ಪಕ್ಷದವರು ರಾಜಕೀಯವಾಗಿ ಮಾತನಾಡುತ್ತಾರೆ. ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಹೆದರಿಕೊಂಡು ಕೆಲಸ ಮಾಡಲು ಆಗುತ್ತದೆಯೇ ಎಂದು ಪ್ರಶ್ನಿಸಿದ ಅವರು, ನಮ್ಮ ತಪ್ಪಿದ್ದರೆ ಗಲ್ಲಿಗೇರಿಸಲಿ. ವಿರೋಧ ಮಾಡುತ್ತಿರುವವರು ಯಾರೂ ಹರಿಶ್ಚಂದ್ರನ ಮೊಮ್ಮಕ್ಕಳು ಅಲ್ಲ ಎಂಬುದು ಗೊತ್ತಿದೆ ಎಂದು ಕಿಡಿ ಕಾರಿದರು.








