
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ವಿಜ್ಞಾನ ವಿಭಾಗಗಳ ಆಶ್ರಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ 35 ನೇ ವರ್ಷದ ಇನ್ಡೆಪ್ತ್ ಕಾರ್ಯಕ್ರಮ ನಡೆಯಿತು.
ಮೂಲ ವಿಜ್ಞಾನದ ಮೂಲಭೂತ ಸಂಗತಿಗಳನ್ನು ವಿವರಿಸುವ ಈ ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪಿ.ಶ್ರೀನಿವಾಸ ಪೈ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮೂಲ ವಿಜ್ಞಾನದಲ್ಲಿ ಸಂಶೋಧನೆಗಳಿಗೆ ಸಾಕಷ್ಟು ಅವಕಾಶವಿದೆ ಎಂದು ನುಡಿದರು.
ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡುವುದಕ್ಕೆ ಮುಂದೆ ಬರಬೇಕು. ಹೊಸ ಹೊಸ ಆವಿಷ್ಕಾರಗಳನ್ನು ಮಾಡುವುದರ ಮೂಲಕ ಸಮಾಜಕ್ಕೆ ನೆರವಾಗಬೇಕು. ಇಂದು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮೆರೆಯುವುದಕ್ಕೆ ಸಾಕಷ್ಟು ಪ್ರೋತ್ಸಾಹ ಸರ್ಕಾರದಿಂದ ದೊರಕುತ್ತಿದೆ.
ವಿವಿಧ ಬಗೆಯ ವಿದ್ಯಾರ್ಥಿವೇತನಗಳು ದೊಡ್ಡ ಮಟ್ಟದಲ್ಲಿ ದೊರಕುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆ ಬಗೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ ಕಾಲೇಜಿನ ವಿಜ್ಞಾನ ವಿಭಾಗಗಳು ಕಳೆದ ಮೂರು ದಶಕಗಳಿಗೂ ಮಿಕ್ಕ ವರ್ಷಗಳಿಂದ ವಿಜ್ಞಾನದ ಆಸಕ್ತಿಯನ್ನು ಎಳೆಯ ಮಕ್ಕಳಲ್ಲಿ ಮೂಡಿಸುವ ಪ್ರಯತ್ನ ಮಾಡುತ್ತಿವೆ.
ಅನೇಕ ವಿದ್ಯಾರ್ಥಿಗಳು ಇಲ್ಲಿನ ಮಾರ್ಗದರ್ಶನದ ನಂತರ ಹೊಸ ಸಂಶೋಧನೆಯೊಂದಿಗೆ ಮಾರ್ಗದರ್ಶನ ಪಡೆಯುವುದಕ್ಕಾಗಿ ಇಲ್ಲಿಗೆ ಬರುತ್ತಿರುತ್ತಾರೆ. ವಿಜ್ಞಾನ ಕ್ಷೇತ್ರದಲ್ಲಿ ಯಾವುದೇ ಸಾಧನೆ ಮಾಡುವುದಕ್ಕೆ ನಮ್ಮ ಕಾಲೇಜಿನ ವಿಜ್ಞಾನ ವಿಭಾಗಗಳು ಮಾರ್ಗದರ್ಶನ ಮಾಡುತ್ತವೆ ಎಂದು ನುಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ.ಶ್ರೀಧರ ಎಚ್.ಜಿ, ವಿಜ್ಞಾನ ಸಂಘದ ಸಂಯೋಜಕ ಶಿವಪ್ರಸಾದ್, ಇನ್ ಡೆಪ್ತ್ ಕಾರ್ಯಕ್ರಮ ಸಂಯೋಜಕ ಶ್ರೀಕೃಷ್ಣ ಗಣರಾಜ ಭಟ್ ಮತ್ತಿತರರು ಉಪಸ್ಥಿತರಿದ್ದರು.














