
ಉಡುಪಿ: ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಶುರುವಾಗಿದೆ. ಮೇ 30ರ ಸಂಜೆ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗಲಿದ್ದಾರೆ ಎಂಬ ನಿರೀಕ್ಷೆ ಇದೆ. ರಾಪ್ಟ್ರಪತಿ ಹಾಗೂ ನರೇಂದ್ರ ಮೋದಿ ಅವರ ತೀರ್ಮಾನದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವಿಶೇಷ ಅತಿಥಿಗಳ ಆಗಮವಾಗಲಿದೆ. ಕಾರ್ಯಕ್ರಮಕ್ಕೆ ಬಂಗಾಳ ಇನಿಷಿಯೇಟಿವ್ ಫಾರ್ ಮಲ್ಟಿ ಸೆಕ್ಟರಲ್ ಟೆಕ್ನಿಕಲ್ ಅಂಡ್ ಎಕನಾಮಿಕ್ ಕೋ ಆಪರೇಷನ್ ಸದಸ್ಯ ರಾಷ್ಟ್ರಗಳಿಗೆ ಆಹ್ವಾನ ನೀಡಲಾಗಿದೆ. ಈ ಬಾರಿ ಸಮಯವನ್ನು ಬದಲಾಯಿಸಿ ಸಂಜೆ 7 ಗಂಟೆಗೆ ಕಾರ್ಯಕ್ರಮ ನಿಗದಿ ಮಾಡಲಾಗಿದ್ದು ರಾಷ್ಟ್ರಪತಿ ಭವನದ ಫೋರ್ ಕೋರ್ಟಿನಲ್ಲಿ ಸಮಾರಂಭ ಏರ್ಪಡಿಸಿದ್ದಾರೆ.
ಈ ನಡುವೆ ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪೇಜಾವರ ಶ್ರೀಗಳಿಗೂ ಆಹ್ವಾನ ನೀಡಿದ್ದಾರೆ. ಪೇಜಾವರ ಮಠದ ವಿಶ್ವೇಶ ತೀರ್ಥರಿಗೆ ಪ್ರಧಾನಿ ಕಚೇರಿಯಿಂದ ಆಹ್ವಾನ ನೀಡಲಾಗಿದೆ. ಇಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳು ಭಾಗವಹಿಸಲಿದ್ದು ಮಂಗಳೂರಿನಿಂದ ವಿಮಾನದ ಮೂಲಕ ಪೇಜಾವರ ಶ್ರೀಗಳು ದೆಹಲಿಗೆ ತೆರಳಿದ್ದಾರೆ.








