
ಸುಬ್ರಹ್ಮಣ್ಯ: ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹರಿಯುತ್ತಿರುವ ಕುಮಾರಧಾರ ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ಕ್ಷೇತ್ರದ ಸ್ನಾನ ಘಟ್ಟ ನೆರೆಯಿಂದಾಗಿ ಸಂಪೂರ್ಣ ಮುಳುಗಡೆಗೊಂಡಿದೆ. ಕಳೆದೆರಡು ದಿನಗಳಿಂದ ಈ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ವರ್ಷದಲ್ಲಿ ಮೊದಲ ಸಲ ಸ್ನಾನ ಘಟ್ಟ ಮುಳುಗಡೆಯಾಗಿದೆ. ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಎಚ್ಚರಿಕೆಯಿಂದ ನದಿಗೆ ಇಳಿಯುವಂತೆ ಸೂಚನೆ ನೀಡಲಾಗಿದೆ. ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ನಾನ ಘಟ್ಟದ ಸುತ್ತ ವಿಪತ್ತು ರಕ್ಷಣಾ ತಂಡವನ್ನು ನಿಯೋಜಿಸಲಾಗಿದೆ.















