
ಬೆಳಗಾವಿ: ನವೆಂಬರ್ ಇಲ್ಲವೆ, ಡಿಸೆಂಬರ್ ನಲ್ಲಿ ಹೊಸ ಕೈಗಾರಿಕಾ ನೀತಿ ಜಾರಿಗೆ ತರಲಾಗುವದು ಎಂದು ರಾಜ್ಯ ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಲೇ ಹೊಸ ಕೈಗಾರಿಕಾ ನೀತಿ ತರುವ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಸದ್ಯದಲ್ಲೇ ಗುಜರಾತ್, ಮಧ್ಯಪ್ರದೇಶ, ತೆಲಂಗಾಣಾ, ಆಂಧ್ರಪ್ರದೇಶ ರಾಜ್ಯಗಳ ಕೈಗಾರಿಕಾ ನೀತಿಗಳನ್ನು ಅಧ್ಯಯನ ಮಾಡಿ ಒಂದು ಉತ್ತಮ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕವಾದ ನೀತಿ ಜಾರಿಗೆ ತರಲಾಗುವುದು ಎಂದರು.

ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ಹಲವು ಭಾಗಗಳಲ್ಲಿ, ಕೈಗಾರಿಕೆಗಳ ಸ್ಥಾಪನೆಗೆ ಮಹಾರಾಷ್ಟ್ರದ ಉದ್ಯಮಿಗಳು ಆಸಕ್ತಿ ತೋರಿಸಿದ್ದಾರೆ. ಇದರ ಬಗ್ಗೆ ಪರಿಶೀಲನೆ ನಡೆಸಿ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲಾಗುವುದು. ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಲು, ಬರುವ ದಿನಗಳಲ್ಲಿ ಕೈಗಾರಿಕಾ ಅದಾಲತ್ ನಡೆಸುವ ಉದ್ದೇಶ ಇದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.
















