
ಬೆಂಗಳೂರು: ತಪ್ಪು ಮಾಹಿತಿ ನೀಡಿ ಅನಧಿಕೃತ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವುದು ಶಿಕ್ಷಾರ್ಹವಾಗಿದೆ. ಫಲಾನುಭವಿಗಳಲ್ಲದವರು ಸ್ವಯಂ ಪ್ರೇರಿತರಾಗಿ ಸರ್ಕಾರಕ್ಕೆ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಬೇಕೆಂದು ಜಿಲ್ಲಾ ಉಪನಿರ್ದೇಶಕ ಆರ್.ಡಿ.ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕಿನಲ್ಲಿ ದುರ್ಬಲವಾಗಿ ಹಿಂದೂಳಿದ ಕುಟುಂಬಗಳಿಗೆ, ಆಹಾರ ಭದ್ರತೆ ಒದಗಿಸಲು ಸರ್ಕಾರದಿಂದ ಬಿಪಿಎಲ್ ಪಡಿತರ ಚೀಟಿ ವಿತರಿಸಲಾಗಿದ್ದು, ಆದರೆ ಅನೇಕ ಸ್ಥಿತಿವಂತ ಕುಟುಂಬದವರೂ, ಸಹ ಪಡಿತರ ಆಹಾರ ಪದಾರ್ಥಗಳನ್ನು ಪಡೆಯುತ್ತಿದ್ದಾರೆ. ಅಂತವರು ಸೆ.30 ಒಳಗಾಗಿ ಅನರ್ಹ ಬಿಪಿಎಲ್ ಪಡಿತರ ಚೀಟಿ ಹಿಂದಿರುಗಿಸದಿದ್ದರೆ, ಪಡಿತರ ಚೀಟಿ ರದ್ದುಪಡಿಸಲಾಗುವುದು ಎಂದಿದ್ದಾರೆ. ಆರ್ಥಿಕವಾಗಿ ಸಬಲವಾಗಿರುವ ಕುಟುಂಬಗಳು ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಪಡೆದು ಸರ್ಕಾರಕ್ಕೆ ವಂಚನೆ ಮಾಡಿರುವುದು ಕಂಡುಬಂದಿದೆ.

ಸರ್ಕಾರದ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡವರ ವಿರುದ್ಧ 1977 ರ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.









