
ಚಿಕ್ಕಮಗಳೂರು, ಜೂನ್ 15: ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ವಿಧಿವಶ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸ್ವಗ್ರಾಮ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಲಿಂಗಾಯತ ಸಮುದಾಯದ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ಮಾಡಲಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮ ಸಂಚಾರಿ ವಿಜಯ್ ಅವರ ಹುಟ್ಟೂರಾಗಿದೆ.

ಸಂಚಾರಿ ವಿಜಯ್ ಸ್ನೇಹಿತ ರಘು ತೋಟದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆ ಮಾಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ನಟ ವಿಜಯ್ ಹುಟ್ಟೂರು ಪಂಚನಹಳ್ಳಿಯಲ್ಲಿ ಮಣ್ಣಲ್ಲಿ ಮಣ್ಣಾಗಲಿದ್ದಾರೆ.
ಪಂಚನಹಳ್ಳಿಗೆ ಬಂದಾಗ ಇದೇ ತೋಟದಲ್ಲಿ ಸಂಚಾರಿ ವಿಜಯ್ ಕಾಲ ಕಳೆಯುತ್ತಿದ್ದ ಎನ್ನಲಾಗಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಂತಿಮ ವಿಧಿ ವಿಧಾನ ನಡೆಯಲಿದ್ದು, ಕುಪ್ಪೂರು ಮಠದ ಮಠಾಧೀಶರ ನೇತೃತ್ವದಲ್ಲಿ ಅಂತ್ಯಸಂಸ್ಕಾರಕ್ಕೆ ತಯಾರಿ ಮಾಡಲಾಗುತ್ತಿದೆ.














