
ಸತತ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹಕ್ಕೆ ಸಿಲುಕಿದ ಗುಲ್ವಾಡಿ ಗ್ರಾಮದ ಕುಚ್ಚಟ್ಟು ಪ್ರದೇಶದ ಮನೆಗಳಿಗೆ ಭೇಟಿ ನೀಡಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಸ್ಥಳಕ್ಕೆ ಬೋಟ್ ವ್ಯವಸ್ಥೆಯನ್ನು ಮಾಡುವಂತೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಯಿತು.
ಮೂರು ದಶಕಗಳ ಬೇಡಿಕೆಯಾಗಿರುವ ಹೊಳೆದಂಡೆ ಯೋಜನೆಗೆ ಈಗಾಗಲೇ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಅಗಸ್ಟ್ ನಲ್ಲಿ ಕೆಲಸ ಆರಂಭವಾಗಲಿದೆ. ಶಾಶ್ವತ ಪರಿಹಾರಕ್ಕೆ ಇನ್ನೂ 2 ಕೋಟಿ ಅನುದಾನದ ಅಗತ್ಯವಿದ್ದು, ಆದಷ್ಟು ಶೀಘ್ರವಾಗಿ ಈ ಭಾಗದ ಜನರ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಶಾಸಕ ಸುಕುಮಾರ್ ಶೆಟ್ಟಿ ಭರವಸೆ ನೀಡಿದರು.














