
ಮಂಗಳೂರು, ಅ 10: ಕಾಸರಗೋಡು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಡ್ಡಾಯ ಮಲಯಾಳಂ ಕಲಿಸುವ ಆದೇಶವನ್ನು ರದ್ದುಗೊಳಿಸುವಂತೆ ಕೇರಳ ಸರಕಾರದ ಮೇಲೆ ಕರ್ನಾಟಕ ಸರಕಾರ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಕಾಸರಗೋಡು ಕನ್ನಡ ಹೋರಾಟ ಸಮಿತಿ ವತಿಯಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಯಿತು.

ಈ ಸಂದರ್ಭ ಮಾತನಾಡಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪಕುಮಾರ್ ಕಲ್ಕೂರ ಕಾಸರಗೋಡಿನಲ್ಲಿ ಕನ್ನಡಕ್ಕಾಗಿ ದಿಲ್ಲಿಯವರೆಗೆ ಧ್ವನಿ ಮೊಳಗಬೇಕು ಎಂದು ಹೇಳಿದರು. ಅಲ್ಲದೆ ಮಂಗಳೂರು ರೈಲು ನಿಲ್ದಾಣದಲ್ಲಿ ಕನ್ನಡ ಮಾಹಿತಿ, ಸೂಚನೆ ಹಾಗೂ ಮಂಗಳೂರಿನಿಂದ ಕಾಞಂಗಾಡಿನವರೆಗಿನ ರೈಲು ನಿಲ್ದಾಣಗಳಲ್ಲಿ ಮಲೆಯಾಳಂ ಭಾಷೆಯೊಂದಿಗೆ ಕನ್ನಡ ಭಾಷೆಯನ್ನು ಕೂಡ ಬಳಸಲು ಸೂಕ್ತ ಆದೇಶ ನೀಡಬೇಕು ಎಂದು ರೈಲ್ವೇ ಅಧಿಕಾರಿಗಳಿಗೆ ಸೂಚಿಸಬೇಕು ಎಂದರು. ಅಲ್ಲದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದ.ಕ. ಜಿಲ್ಲಾಧಿಕಾರಿಗೆ ಈ ವೇಳೆ ಮನವಿ ಸಲ್ಲಿಸಲಾಯಿತು.
ಹೋರಾಟ ಸಮಿತಿ ಅಧ್ಯಕ್ಷ ಮುರಳೀಧರ ಬಳ್ಳಕ್ಕುರಾಯ, ಪ್ರ.ಕಾರ್ಯದರ್ಶಿ ಭಾಸ್ಕರ ಕಾಸರಗೋಡು, ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.














