ಐಎಎಸ್-ಐಪಿಎಸ್ ಮಹಿಳಾ ಅಧಿಕಾರಿಗಳ ಕಿತ್ತಾಟ : ಇಲಾಖಾ ಮಟ್ಟದ ತನಿಖೆಗೆ ಸರ್ಕಾರ ಆದೇಶ, ಇಬ್ಬರಿಗೂ ನೊಟೀಸ್ –ಕಹಳೆ ನ್ಯೂಸ್

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ಕಿತ್ತಾಟ ಪ್ರಕರಣ ಇದೀಗ ಕೋರ್ಟ್ ಮೆಟ್ಟಿಲೇರಿದ್ದು ಮುಂದಿನ ವಿಚಾರಣೆಯನ್ನು ಮಾರ್ಚ್ ೭ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ರೀತಿ ಮಾನಹಾನಿಕಾರಕ ಪೋಸ್ಟ್ ಗಳನ್ನು ಹಾಕದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದಂತೆ ಕೋರ್ಟ್ ಇಬ್ಬರಿಗೂ ತಾಕೀತು ಮಾಡಿದೆ.
ಸರ್ಕಾರದಿಂದ ತನಿಖೆಗೆ ಆದೇಶ: ಪ್ರಕರಣ ಸಂಬAಧ ಇಲಾಖಾ ಮಟ್ಟದಲ್ಲಿ ತನಿಖೆಗೆ ಆದೇಶಿಸಿ ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆದೇಶದ ಮೇರೆಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖೆ ಮಟ್ಟದಲ್ಲಿ ತನಿಖೆ ನಡೆಸಲು ನೊಟೀಸ್ ಜಾರಿ ಮಾಡಿದ್ದಾರೆ.
ಬಹಿರಂಗವಾಗಿ ಆರೋಪ-ಪ್ರತ್ಯಾರೋಪಗಳನ್ನು ಇಬ್ಬರೂ ಅಧಿಕಾರಿಗಳು ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ನೀಡಿದೆ. ಮುಖ್ಯ ಕಾರ್ಯದರ್ಶಿಗಳು ಈ ಹಿಂದೆ ಇಬ್ಬರೂ ಅಧಿಕಾರಿಗಳನ್ನು ಕರೆಸಿ, ಪರಸ್ಪರರ ವಿರುದ್ಧ ಹೇಳಿಕೆ ನೀಡದಂತೆ ಸೂಚಿಸಿದ್ದರು. ಐಪಿಎಸ್ ಅಧಿಕಾರಿ ರೂಪಾ ಅವರು ರೋಹಿಣಿ ಸಿಂಧೂರಿ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ.













