
ವಿಟ್ಲ ಪರಿಸರದಲ್ಲಿ ತ್ಯಾಜ್ಯ ಎಸೆದ ದುಷ್ಕರ್ಮಿಗಳನ್ನು ವಿಡಿಯೋ ಚಿತ್ರೀಕರಿಸಿ ಸ್ಥಳೀಯರು ಪತ್ತೆ ಮಾಡಿದ ಘಟನೆ ನಡೆದಿದೆ. ವಿಡ್ಲದ ಕುಡ್ತಮುಗೇರು, ಮಂಕುಡೆ, ಕುದ್ರಿಯ, ಕುಳಾಲು ಪರಿಸರದ ಹಸುಗಳು, ಆಡುಗಳು, ನಾಯಿ-ಬೆಕ್ಕುಗಳೆಲ್ಲಾ ತ್ಯಾಜ್ಯ ತಿಂದು ಮಾರಕ ರೋಗಗಳಿಗೆ ತುತ್ತಾಗುತ್ತಿವೆ.
ತ್ಯಾಜ್ಯ ಎಸೆಯುವ ದುಷ್ಕರ್ಮಿಗಳ ಅಮಾನವೀಯ ಕ್ರಮದಿಂದ ಪ್ರಕೃತಿ ಪ್ರೇಮಿಗಳು ಆಕ್ರೋಶಗೊಂಡಿದ್ದರು. ದುಷ್ಕರ್ಮಿಗಳಿಗೆ ತಕ್ಕಪಾಠ ಕಲಿಸಲು ತಯಾರಾಗಿದ್ದರು. ಗೂಡ್ಸ್ ಟೆಂಪೋದಲ್ಲಿ ಬಂದ ಇಬ್ಬರು ದುರ್ನಾತ ಬರುತ್ತಿದ್ದ ತ್ಯಾಜ್ಯಗಳ ಮೂಟೆಗಳನ್ನು ರಸ್ತೆ ಬದಿ ಎಸೆದು ಎಸ್ಕೇಪ್ ಆಗುತ್ತಿದ್ದಂತೆ ಸ್ಥಳೀಯರೋಬ್ಬರು ಮೊಬೈಲ್ ಮೂಲಕ ಚಿತ್ರೀಕರಿಸಿದ್ದರು.

ವೀಡಿಯೋ ಹರಿದಾಡುತ್ತಿದ್ದಂತೆ ತ್ಯಾಜ್ಯ ಎಸೆದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿದ ಪ್ರಕೃತಿ ಪ್ರೇಮಿ ಯುವಕರು ಅರಣ್ಯ ಇಲಾಖೆಗೂ ಮಾಹಿತಿ ನೀಡಿದರು. ಸ್ಥಳೀಯ ಯುವಕರು ತ್ಯಾಜ್ಯ ಎಸೆದವರನ್ನು ಸ್ಥಳಕ್ಕೆ ಕರೆಯಿಸಿ ಅವರಿಂದಲೇ ತ್ಯಾಜ್ಯಗಳ ಮೂಟೆಗಳನ್ನು ಪುನಹ ಟೆಂಪೋ ಗೆ ತುಂಬಿಸಿ ರಕ್ಷಿತಾರಣ್ಯ ಪರಿಸರವನ್ನು ಶುಚಿಗೊಳಿಸಿದ್ದಾರೆ. ಕಾರ್ಯಾಚರಣೆಗೆ ಅರಣ್ಯ ಸಿಬ್ಬಂದಿಗಳು ಸಾಥ್ ನೀಡಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.











