ಉಡುಪಿ : ಲಿಂಗತ್ವ ಅಲ್ಪಸಂಖ್ಯಾತರ ಗೌರವ ಬದುಕಿಗೆ ಯಕ್ಷಗಾನದ ಕೌಶಲ್ಯ ತರಬೇತಿ – ಕಹಳೆ ನ್ಯೂಸ್

ಉಡುಪಿ : ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ, ಇಷ್ಠವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವ ಲಿಂಗತ್ವ ಅಲ್ಪ ಸಂಖ್ಯಾತರು, ಕೌಶಲ್ಯಾಬಿವೃಧ್ದಿ ತರಬೇತಿಗಳನ್ನು ಪಡೆಯುವುದರ ಮೂಲಕ ಮತ್ತು ತಮ್ಮಲ್ಲಿನ ಪ್ರತಿಭೆಯ ಮೂಲಕ ಗೌರವಯುತ ಜೀವನ ನಡೆಸಲು ಹಾಗೂ ಅತ್ಯುನ್ನತ ಸಾಧನೆ ಮಾಡಬಹುದಾಗಿದ್ದು, ಇದಕ್ಕೆ ಉಡುಪಿ ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಅತ್ಯುತ್ತಮ ಅವಕಾಶ ಕಲ್ಪಿಸುವ ಮೂಲಕ ರಾಜ್ಯಕ್ಕೆ ಮಾದರಿ ಕಾರ್ಯಕ್ರಮ ಆಯೋಜಿಸಿದೆ.
ಉಡುಪಿ ಜಿಲ್ಲಾಡಳಿತದ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಡಿಯಲ್ಲಿ , ಜಿಲ್ಲೆಯಲ್ಲಿರುವ ಆಸಕ್ತ 19 ಮಂದಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಕಾರ್ಕಳದ ಸ್ತ್ರೀ ಶಕ್ತಿ ಭವನದಲ್ಲಿ ರೂ. 10000 ಗಳ ಸ್ಟೈಪೆಂಡ್ ನೊಂದಿಗೆ 5-6-2023 ರಿಂದ 4-7-2023 ರ ವರೆಗೆ ಒಂದು ತಿಂಗಳ ಕಾಲ ಕರಾವಳಿಯ ಹೆಮ್ಮಯೆ ಕಲೆಯಾದ ಯಕ್ಷಗಾನ ಪ್ರದರ್ಶನದ ಕುರಿತು ತರಬೇತಿ ನೀಡಲಾಗಿದೆ.
ತರಬೇತಿಯಲ್ಲಿ ನೃತ್ಯ, ಅಭಿನಯ, ಸಂಭಾಷಣೆಯಲ್ಲಿ ಪರಿಣಿತ ಸಾಧಿಸಿರುವ ಲಿಂಗತ್ವ ಅಲ್ಪ ಸಂಖ್ಯಾತರು ತರಬೇತಿ ಅಂತ್ಯದಲ್ಲಿ , ಶ್ವೇತ ಕುಮಾರ ಚೆರಿತ್ರೆ ಎಂಬ ಪೌರಾಣಿಕ ಯಕ್ಷಗಾನ ಪ್ರಸಂಗವನ್ನು ಅದ್ಭುತವಾಗಿ ಪ್ರದರ್ಶಿಸಿ, ಮೆಚ್ಚುಗೆ ಗಳಿಸಿದರು.
ಯಕ್ಷಗಾನ ತರಬೇತಿಯ ನಾಟ್ಯ ಗುರುಗಳಾಗಿ ಸುಧೀರ್ ಉಪ್ಪೂರು ಮತ್ತು ವಿಜಯಗಾಣಿಗ ಬೀಜಮಕ್ಕಿ, ಚಂಡೆ ಶಶಿಕುಮಾರ್,ಮದ್ದಳೆ ಯಲ್ಲಿ ನವೀನ್ ಕುಮಾರ್ ಮತ್ತು ಭಾಗವತಿಕೆಯಲ್ಲಿ ಸುದೀಪ್ ಚಂದ್ರ ಶೆಟ್ಟಿ ಸಹಕಾರ ನೀಡಿದ್ದಾರೆ.








